ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯಲ್ಲಿ ಭಾರೀ ಅನಾಹುತ ಸಂಭವಿಸಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ. ಶಿರಾಡಿ ಘಾಟ್ನ ದೊಡ್ಡತಪ್ಲೆ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭಾರೀ ಪ್ರಮಾಣದ ಭೂಕುಸಿತ ಸಂಭವಿಸಿದ್ದು, ಹಲವು ವಾಹನಗಳು ಮಣ್ಣಿನಡಿ ಸಿಲುಕಿವೆ.
ಹಾಸನ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿಂದ ನಿರಂತರ ಮಳೆಯಾಗುತ್ತಿದ್ದು, ಜಿಲ್ಲೆಯ ಹಲೆವಡೆ ಭೂಕುಸಿತದಂತಹ ಅನಾಹುತಗಳು ಸಂಭವಿಸುತ್ತಿದೆ. ಇಂದು (ಜುಲೈ 30) ಮಂಗಳವಾರ ದೊಡ್ಡತಪ್ಲೆ ಬಳಿ ದೊಡ್ಡ ಮಟ್ಟದ ಭೂ ಕುಸಿತ ಸಂಭವಿಸಿದ್ದು, ಎರಡು ಕಾರು, ಒಂದು ಟ್ಯಾಂಕರ್ ಸೇರಿ ಆರು ವಾಹನಗಳು ಮಣ್ಣನಡಿ ಸಿಲುಕಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯತ್ತಿದ್ದು, ರಕ್ಷಣಾ ಸಿಬ್ಬಂದಿ ಜೆಸಿಬಿ ಮೂಲಕ ಮಣ್ಣು ತೆರವು ಮಾಡುತ್ತಿದ್ದಾರೆ. ಸ್ಥಳದಲ್ಲಿ ಆತಂಕ ಹೆಚ್ಚಾಗಿದೆ. ಮತ್ತಷ್ಟು ಮಣ್ಣು ಕುಸಿದರೆ ದೊಡ್ಡ ಅನಾಹುತವೇ ಸಂಭವಿಸುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಸದ್ಯ ಶಿರಾಡಿ ಘಾಟ್ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಿಂದ ಬರುತ್ತಿರುವ ವಾಹನಗಳನ್ನು ಗುಂಡ್ಯದಲ್ಲೇ ಪೊಲೀಸರು ತಡೆಯುತ್ತಿದ್ದು, ಪರ್ಯಾಯ ಮಾರ್ಗದಲ್ಲಿ ಚಲಿಸುವಂತೆ ಸೂಚಿಸಲಾಗುತ್ತಿದೆ.
ಶಿರಾಡಿ ಘಾಟ್ನಲ್ಲಿ ಗುಡ್ಡ ಕುಸಿತದಿಂದ ಅನೇಕ ವಾಹನಗಳು ಮಣ್ಣಿನಡಿ ಸಿಲುಕಿದ್ದು, ಗ್ಯಾಸ್ ಟ್ಯಾಂಕರ್ವೊಂದು ಸಿಲುಕಿರುವುದು ಆತಂಕ ಹೆಚ್ಚಿಸಿದೆ. ಮಣ್ಣಿನ ಮಧ್ಯೆ ಸಿಲುಕಿರುವ ಗ್ಯಾಸ್ ಟ್ಯಾಂಕರ್ನಿಂದ ಗ್ಯಾಸ್ ಸೋರಿಕೆಯಾಗುತ್ತಿದೆ. 31 ಟನ್ ತೂಕದ ಸಂಪೂರ್ಣ ತುಂಬಿರುವ ಗ್ಯಾಸ್ ಟ್ಯಾಂಕರ್ ಸೋರಿಕೆಯಾಗುತ್ತಿದ್ದು, ಗ್ಯಾಸ್ ಸೋರಿಕೆ ನಿಯಂತ್ರಣಕ್ಕಾಗಿ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿದ್ದಾರೆ. ಎರಡು ಗಂಟೆಯಿಂದ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ನಿರಂತರ ಮಳೆಯಿಂದಾಗಿ ಮಣ್ಣು ತೆರವಿಗೆ ಅಡ್ಡಿಯಾಗುತ್ತಿದೆ. ಮಳೆ ಹೀಗೆ ಮುಂದುವರೆದರೆ ಮಣ್ಣು ತೆರವು ಕಾರ್ಯ ಇನ್ನಷ್ಟು ವಿಳಂಬವಾಗುತ್ತಿದೆ.