Karnataka Rains :- ರಾಜ್ಯದಲ್ಲಿ ಆಗಸ್ಟ್ 14ರಿಂದ ಭಾರೀ ಮಳೆ ಮುನ್ಸೂಚನೆ: ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿರಿ; ಸಚಿವ ಕೃಷ್ಣ ಬೈರೇಗೌಡ ಸೂಚನೆ





ಬೆಂಗಳೂರು: ರಾಜ್ಯದಲ್ಲಿ ಆ.14ರಿಂದ 20 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಗಳಿದ್ದು, ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿರುವಂತೆ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಸೋಮವಾರ ಸೂಚನೆ ನೀಡಿದ್ದಾರೆ.

ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಪರಿಶೀಲನೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಸಚಿವರು ಮಾತನಾಡಿದರು.

ದಕ್ಷಿಣ ಒಳನಾಡು ಪ್ರದೇಶವನ್ನು ಹೊರತುಪಡಿಸಿ ಉಳಿದೆಡೆಗಳಲ್ಲಿ ನೈರುತ್ಯ ಮುಂಗಾರು ಆಗಮಿಸಿದೆ. ಅದಾಗ್ಯೂ ಆಗಸ್ಟ್ 14ರ ನಂತರ ಕಿತ್ತೂರು ಕರ್ನಾಟಕ ಮತ್ತು ಮಲೆನಾಡು ಪ್ರದೇಶಗಳಲ್ಲಿ ಆಗಸ್ಟ್ 20 ರವರೆಗೆ ಹೆಚ್ಚಿನ ಮಳೆಯಾಗುವ ನಿರೀಕ್ಷೆಗಳಿವೆ. ಹೀಗಾಗಿ, ಸನ್ನದ್ಧರಾಗಿರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಕರ್ನಾಟಕ-ಮಹಾರಾಷ್ಟ್ರ ಗಡಿಭಾಗ ಹಾಗೂ ಕೃಷ್ಣ-ಕಾವೇರಿ ನದಿಪಾತ್ರದ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಈ ನಿಟ್ಟಿನಲ್ಲಿ ಜೀವಹಾನಿಯಂತಹ ಅನಾಹುತ ತಪ್ಪಿಸಲು ಮತ್ತಷ್ಟು ಪೂರ್ವ ತಯಾರಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.

ಮಳೆಯಾಗುವ ಸಂದರ್ಭದಲ್ಲಿ ನದಿ ಉಕ್ಕಿಹರಿಯುತ್ತದೆ, ಇದೇ ವೇಳೆ ಅಣೆಕಟ್ಟೆಗಳಿಂದಲೂ ನೀರು ಹರಿಸಿದರೆ ಪ್ರವಾಹ ಸ್ಥಿತಿ ಉಂಟಾಗಿ ಜನ ಪರಿತಪಿಸುವ ಸ್ಥಿತಿ ಎದುರಾಗುತ್ತದೆ. ಹೀಗಾಗಿ ಅಣೆಕಟ್ಟೆಗಳು ತುಂಬುವವರೆಗೂ ಕಾಯದೆ ಜಲಾಶಯಗಳ ಒಳಹರಿವನ್ನು ನಿಯಮಿತವಾಗಿ ಬಿಡುಗಡೆ ಮಾಡುವ ಮೂಲಕ ನೆರೆಯನ್ನು ನಿಯಂತ್ರಿಸಬಹುದು. ಈ ಮಾದರಿಯ ನೀರಿನ ನಿರ್ವಹಣೆ ಬಗ್ಗೆಯೂ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. 


ನವೀನ ಹಳೆಯದು
WhatsApp Join our 'Shan Media News' WhatsApp group - Join Now ×